Vydyaloka

ಇರುವುದೊಂದೇ ಹೃದಯ ಜೋಪಾನ:ಹೃದಯ ರೋಗಗಳನ್ನು ತಡೆಗಟ್ಟುವುದು ಹೇಗೆ?

ಪ್ರತಿ ವರ್ಷ ಜಗತ್ತಿನಾದ್ಯಂತ ಕನಿಷ್ಠವೆಂದರೂ 17.5 ಮಿಲಿಯನ್ ಜನರು ಹೃದಯಾಘಾತ ಮತ್ತು ಹೃದಯ ಸಂಬಂಧಿ ರೋಗಗಳಿಂದ ಸಾಯುತ್ತಾರೆ. ಕ್ಯಾನ್ಸರ್, ಏಡ್ಸ್, ಮಲೇರಿಯಾ ಈ ಮೂರು ರೋಗಗಳನ್ನು ಒಟ್ಟು ಸೇರಿಸಿದರೆ ಆಗುವ ವರ್ಷಾವಧಿ ಮರಣದ ಸಂಖ್ಯೆಗಿಂತಲೂ ಹೃದಯ ಸಂಬಂಧಿ ರೋಗಗಳಿಂದ ಉಂಟಾಗುವ ಮರಣ ಹೆಚ್ಚು. ಈ ಹೃದಯ ಸಂಬಂಧಿ ರೋಗಗಳಲ್ಲಿ ಸುಮಾರು 80 ಶೇಕಡಾ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಉತ್ತಮ ವ್ಯಾಯಾಮ, ತಂಬಾಕು ಮತ್ತು ಮಧ್ಯಪಾನ ಸೇವನೆಯನ್ನು ತ್ಯಜಿಸುವುದು, ಉತ್ತಮ ಆಹಾರ ಪದ್ಧತಿ ಹಾಗೂ ಉತ್ತಮ ಜೀವನಶೈಲಿಯನ್ನು ಅಳವಡಿಸಿಕೊಂಡಲ್ಲಿ, ಹೃದಯಾಘಾತದ ಅನುಪಾತನನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡಬಹುದು.
ಅನಾರೋಗ್ಯಕರವಾದ ಆಹಾರ ಪದ್ಧತಿ: ಆಹಾರಕ್ಕೂ ಹೃದಯಕ್ಕೂ ನೇರ ಸಂಬಂಧವಿದೆ. ಅತಿಯಾದ ಕೊಬ್ಬಿನಂಶ ಇರುವ ಅತಿಯಾದ ಸೋಡಿಯಂ ಇರುವ ಕರಿದ ತಿಂಡಿಗಳು ಮತ್ತು ಸಿದ್ಧ ಆಹಾರವನ್ನು ತೆಗೆದುಕೊಳ್ಳಬಾರದು. ಹಸಿ ತರಕಾರಿಗಳು ಮತ್ತು ಹಣ್ಣು ಹಂಪಲುಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಆಮ್ಲಯುಕ್ತ ಪೇಯಗಳು ಮತ್ತು ರಾಸಾಯನಿಕ ಮಿಶ್ರಿತ ಸಿದ್ಧ ಆಹಾರಗಳೂ ಕೂಡಾ ಹೃದಯದ ಆರೋಗ್ಯಕ್ಕೆ ಮಾರಕವಾಗಬಲ್ಲದು.
ಜೀವನ ಶೈಲಿಯ ಬದಲಾವಣೆ: ಅತಿಯಾದ ಮಾನಸಿಕ ಒತ್ತಡ ಕೂಡಾ ಹೃದಯಘಾತಕ್ಕೆ ಪರೋಕ್ಷವಾಗಿ ಕಾರಣವಾಗಬಲ್ಲದು. ಕೆಲಸದ ಒತ್ತಡದಿಂದ ನಿದ್ದೆ ಕಡಿಮೆಯಾದಲ್ಲಿ ಹೃದಯಾಘಾತವಾಗುವ ಸಂಭವ ಇರುತ್ತದೆ. ಅದೇ ರೀತಿ ಮಾನಸಿಕ ಒತ್ತಡದಿಂದ ರಸದೂತಗಳ ಏರುಪೇರು ಉಂಟಾಗಿ ಹೃದಯಕ್ಕೆ ಮಾರಕವಾಗಬಹುದು. ಅತಿಯಾದ ಮಧ್ಯಪಾನ, ಧೂಮಪಾನ ಖಂಡಿತವಾಗಿಯೂ ಹೃದಯ ರೋಗಗಳಿಗೆ ನೇರ ಪೂರಕ.
ಬೊಜ್ಜು, ಅನುವಂಶಿಯತೆ ಮತ್ತಿತರ ಕಾರಣಗಳು: ಈಗಿನ ಬದಲಾದ ಆಹಾರ ಪದ್ಧತಿಯಿಂದಾಗಿ, ಚಿಕ್ಕ ಮಕ್ಕಳಲ್ಲೂ ಬೊಜ್ಜು ಜಾಸ್ತಿಯಾಗಿ ಕೇವಲ ಮೂವತ್ತರ ಆಸು ಪಾಸಿನಲ್ಲಿಯೇ ಹೃದಯಾಘಾತ ವಾಗುವ ಆತಂಕಕಾರಿ ಬೆಳವಣಿಗೆ ಕಂಡು ಬರುತ್ತದೆ. ಅದೇ ರೀತಿ ಅನುವಂಶೀಯತೆ ಕೂಡ ಹೃದ್ರೋಗಕ್ಕೆ ಕಾರಣವಾಗಬಹುದು. ಅದೇರೀತಿ ಅಧಿಕ ರಕ್ತದ ಒತ್ತಡ ಮತ್ತು ಮಧುಮೇಹ ರೋಗಿಗಳು ಹೆಚ್ಚಿನ ಕೊಲೆಸ್ಟ್ರಾಲ್ ಹೊಂದಿರುವವರು ಮತ್ತು ದೇಹದ ತೂಕ ಜಾಸ್ತಿ ಇರುವವರು, ಸಾಕಷ್ಟು ಮುಂಜಾಗರೂಕತೆ ವಹಿಸಿ ಜೀವನ ಶೈಲಿ ಮತ್ತು ಆಹಾರ ಪದ್ಧತಿ ಮಾರ್ಪಾಡು ಮಾಡಿದಲ್ಲಿ ಹೃದ್ರೋಗ ಸಂಬಂಧಿ ರೋಗಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು.
ನಿಯಮಿತವಾಗಿ ಕುಟುಂಬ ವೈದ್ಯರ ಭೇಟಿ: ಹೃದಯ ರೋಗಕ್ಕೆ ಪೂರಕವಾದ ವ್ಯಕ್ತಿಗಳು ಅಂದರೆ ಹೆಚ್ಚಿನ ಬೊಜ್ಜು ಅಧಿಕ ದೇಹದ ಭಾರ, ಅಧಿಕ ರಕ್ತದೊತ್ತಡ ಮಧುಮೇಹ ರೋಗಿಗಳು ಮತ್ತು ಅನುವಂಶೀಯವಾಗಿ ಹೆಚ್ಚಿನ ಕೊಲೆಸ್ಟ್ರಾಲ್ ಮತ್ತು ಹೃದಯಾಘಾತದ ಸಾಧ್ಯತೆ ಇರುವವರು ಸೂಕ್ತ ಚಿಕಿತ್ಸೆ ಪರಿಹಾರ ಮತ್ತು ಮಾರ್ಗದರ್ಶನ ತೆಗೆದು ಕೊಂಡಲ್ಲಿ ಪರಿಣಾಮಕಾರಿಯಾಗಿ ಹೃದಯಾಘಾತವನ್ನು ತಡೆಗಟ್ಟಬಹುದು.
ದೈಹಿಕ ವ್ಯಾಯಾಮ: ದೈಹಿಕ ವ್ಯಾಯಾಮ ಅಥವಾ ಕಸರತ್ತು ಹೃದಯದ ಆರೋಗ್ಯಕ್ಕೆ ಅತೀ ಅವಶ್ಯಕ. ಕನಿಷ್ಠ ಪಕ್ಷ ದಿನಕ್ಕೆ 30ನಿಮಿಷಗಳ ಬಿರುಸು ನಡಿಗೆ ಮಾಡಲೇ ಬೇಕು. ಹೀಗೆ ಮಾಡಿದಲ್ಲಿ ಹೃದಯಾಘಾತವನ್ನು ಶೇಕಡಾ 60 ಕಡಿಮೆಯಾಗುತ್ತದೆ ಎಂದು ಸಂಶೋಧನೆಗಳು ಹೇಳಿವೆ. ಈಗಿನ ಒತ್ತಡದ ಧಾವಂತದ ಬದುಕಿನಲ್ಲಿ ಅತಿಯಾದ ಕೆಲಸದ ಒತ್ತಡ, ತೀವ್ರ ತರವಾದ ಪೈಪೋಟಿ ಮತ್ತು ದೈಹಿಕ ವ್ಯಾಯಾಮದ ಕೊರತೆಯಿಂದ ರಸದೂತಗಳ ಸ್ರವಿಕೆ ಏರುಪೇರಾಗಿ ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
ಮುನ್ನೆಚ್ಚರಿಕೆಯಿಂದ ಹೃದಯಾಘಾತ ತಡೆಗಟ್ಟಬಹುದು.ಹೃದಯಾಘಾತ ಎನ್ನುವುದು ಬಹಳ ಶಕ್ತಿಶಾಲಿಯಾದ ರೋಗ ಮತ್ತು ಇದಕ್ಕೆ ಕೊಲ್ಲುವ ಶಕ್ತಿ ಬಹಳ ಅಧಿಕವಾಗಿರುತ್ತದೆ. ಒಂದು ವೇಳೆ ಬದುಕಿ ಉಳಿದರೂ ಮಾನಸಿಕ ಸಾಮಥ್ರ್ಯವನ್ನು ಕುಗ್ಗಿಸುತ್ತದೆ. ಶಸ್ತ್ರ ಚಿಕಿತ್ಸೆ ಮಾಡಿದರೂ, ಮಾನಸಿಕವಾಗಿ ಉಡುಗಿ ಹೋಗಿ ಮೊದಲಿನಂತೆ ಪರಿಣಾಮಕಾರಿಯಾಗಿ ಕೆಲಸಮಾಡಲು ಹೆಚ್ಚು ಸಮಯ ತೆಗೆದು ಕೊಳ್ಳಬಹುದು. ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ. ಇಂದಿನ ಮಕ್ಕಳಿಗೆ ಶಾಲಾ ದಿನಗಳಿಂದಲೇ ಹೃದಯಘಾತದ ದುಷ್ಪರಿಣಾಮಗಳಿಗೆ ಕಾರಣವಾಗುವ ವಿವಿಧ ಗಂಡಾಂತರಕಾರಿ ಅಂಶಗಳ ಬಗ್ಗೆ ತಿಳಿಸಿ ಅವರನ್ನು ಜಾಗೃತಗೊಳಿಸುವ ಅಗತ್ಯವಿದೆ.

 

 

 

 

ಡಾ. ಮಹಂತೇಶ್ ಆರ್. ಚರಂತಿಮಠ್
ಹೃದ್ರೋಗ ತಜ್ಞರು ತಥಾಗತ್ ಹಾರ್ಟ್‍ಕೇರ್ ಸೆಂಟರ್,
ಮಲ್ಲಿಗೆ ಮೆಡಿಕಲ್ ಸೆಂಟರ್ ಆವರಣ, ನಂ. 31/32, ಕೆಸೆಂಟ್ ರಸ್ತೆ, ಬೆಂಗಳೂರು-01
ಭೇಟಿ ಮಾಡಲು ಸಂಪರ್ಕಿಸಿ : 080-22357777, 9900356000
E-mail: mahanteshrc67@gmail.com

Share this: